ಬೆಂಗಳೂರು: ಬಿಸಿಲಬೇಗೆಯಿಂದ ಕಂಗೆಟ್ಟಿದ್ದ ಶಿವಮೊಗ್ಗ ಸೇರಿ ರಾಜ್ಯದ ಎಂಟಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಗುರುವಾರ ಕೆಲಕಾಲ ಉತ್ತಮ ಮಳೆಯಾಗಿದೆ. ಮಳೆ ಸಂಬಂಧಿ ಅನಾಹುತಕ್ಕೆ ಆಟೋ ಮೇಲೆ ಮರ ಬಿದ್ದು ದಂಪತಿ ಸೇರಿ ನಾಲ್ವರು ಬಲಿಯಾಗಿದ್ದಾರೆ.

ಮಂಡ್ಯ, ಶಿವಮೊಗ್ಗ, ಚಾಮರಾಜನಗರ, ಹುಬ್ಬಳ್ಳಿ, ವಿಜಯನಗರ, ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತಿತರ ಜಿಲ್ಲೆಗಳಲ್ಲಿ ಭಾರೀ ಗಾಳಿಸಹಿತ ಉತ್ತಮ ಮಳೆಯಾಗಿದ್ದು, ಕೆಲಕಾಲ ಜನಜೀವನ ಅಸ್ತವ್ಯಸ್ತಗೊಂಡಿತ್ತು.

ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ವೈದ್ಯನಾಥಪುರ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ಕಾರ್ಯದರ್ಶಿ ಮಧು (34) ಎಂಬುವರು ತಮ್ಮ ಪತ್ನಿಯನ್ನು ತವರು ಮನೆಗೆ ಬಿಟ್ಟು ಹಿಂದಿರುಗುವಾಗ ಸಿಡಿಲು ಬಡಿದು ಮೃತಪಟ್ಟಿದ್ದಾರೆ. ಇನ್ನು ಬಿರುಗಾಳಿ ಸಹಿತ ಮಳೆಯ ಜತೆಗೆ ಕಾಣಿಸಿಕೊಂಡ ಸಿಡಿಲಿನ ಆರ್ಭಟಕ್ಕೆ ಬೆದರಿದ ಮದ್ದೂರು ಪಟ್ಟಣದ ಶಿವಪುರ ನಿವಾಸಿ ಗೌರಮ್ಮ (60) ಎಂಬುವವರು ಮನೆಯಲ್ಲೇ ಕುಸಿದು ಬಿದ್ದಿದ್ದು, ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆ ಕೊನೆಯುಸಿರೆಳೆದಿದ್ದಾರೆ.

ಇನ್ನು ಉಡುಪಿ ಜಿಲ್ಲೆಯಲ್ಲಿ ಏಕಾಏಕಿ ಆರಂಭವಾದ ಗಾಳಿ, ಮಳೆಗೆ ಕಾಪು ತಾಲೂಕಿನ ಮಜೂರು ಮಸೀದಿ ಬಳಿ ಚಲಿಸುತ್ತಿದ್ದ ರಿಕ್ಷಾ ಮೇಲೆ ಭಾರೀ ಗಾತ್ರದ ಮರವೊಂದು ಬಿದ್ದು, ಅದರಲ್ಲಿದ್ದ ದಂಪತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅದೃಷ್ಟವಶಾತ್‌ ಆಟೋ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಮುರಿದು ಬಿದ್ದ ವಿದ್ಯುತ್‌ ಕಂಬ: ಮಂಡ್ಯ ಜಿಲ್ಲೆಯ ಮದ್ದೂರು ಪಟ್ಟಣ ಸೇರಿ ತಾಲೂಕಿನ ವಿವಿಧೆಡೆ ಹಾಗೂ ಶಿವಮೊಗ್ಗ ಜಿಲ್ಲೆಯ ರಿಪ್ಪನ್‌ಪೇಟೆ ಸಮೀಪದ ಕೋಡೂರು ಗ್ರಾಪಂ ವ್ಯಾಪ್ತಿಯ ಕರಿಗೆರಸು ಗ್ರಾಮದಲ್ಲಿ ಬಿರುಗಾಳಿ ಸಹಿತ ಮಳೆಗೆ ಹಲವು ಮನೆಗಳ ಚಾವಣಿ ಹಾರಿಹೋಗಿದೆ. ಕೆಲವೆಡೆ ವಿದ್ಯುತ್‌ ಕಂಬಗಳು ಮುರಿದು ಬಿದ್ದು, ವಿದ್ಯುತ್‌ ಸಂಪರ್ಕ ವ್ಯತ್ಯಯಗೊಂಡಿದೆ.

ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಧಾರಾಕಾರ ಮಳೆ ಸುರಿದಿದೆ. ಶಿರಸಿ ತಾಲೂಕಿನ ಬನವಾಸಿಯಲ್ಲಿ ರಾಜ್ಯ ಹೆದ್ದಾರಿ 137ರಲ್ಲಿ ಗೂಡ್‌್ಸ ಆಟೋ ಮೇಲೆ ಬೃಹತ್‌ ಮರ ಬಿದ್ದು ಆಟೋ ಸಂಪೂರ್ಣ ಜಖಂಗೊಂಡಿದೆ. ಅದೃಷ್ಟವಶಾತ್‌ ಆಟೋ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಕುದುರೆಡುವು ಗೊಲ್ಲರಹಟ್ಟಿಯ ಕಣದಲ್ಲಿ ಸಿಡಿಲಿಗೆ ಎರಡು ಎತ್ತುಗಳು ಬಲಿಯಾಗಿವೆ. ಅದೇ ರೀತಿ ಚಾಮರಾಜನಗರ ಜಿಲೆಯ ಹನೂರು ತಾಲೂಕಿನ ದೊಡ್ಡಿಂದುವಾಡಿ ಗ್ರಾಮದಲ್ಲಿ ಭಾರೀ ಗಾಳಿ-ಮಳೆಗೆ 5 ಎಕರೆಯಲ್ಲಿ ಬೆಳೆಯಲಾಗಿದ್ದ ಬಾಳೆ ಬೆಳೆ ನೆಲಕಚ್ಚಿ 18 ಲಕ್ಷ ನಷ್ಟವಾಗಿದೆ ಎನ್ನಲಾಗಿದೆ.

ಕಾರವಾರ : ಇಲ್ಲಿನ ಅಲಿಗದ್ದಾ ಸಮೀಪದ ಅರಬ್ಬಿ ಸಮುದ್ರದಲ್ಲಿ ಬೋಟ್‌ ಲಂಗರು ಹಾಕಿದ್ದ ವೇಳೆ ಭಾರೀ ಗಾಳಿಗೆ, ಅಲೆಗಳ ಅಬ್ಬರಕ್ಕೆ ತೀರಕ್ಕೆ ಬಂದು ನಿಂತಿದೆ.

ಬುಧವಾರ ಮಲ್ಪೆಯ ಬೋಟನ್ನು ಸಮುದ್ರದಲ್ಲಿ ಲಂಗರು ಹಾಕಲಾಗಿತ್ತು. ಅದರದಲ್ಲಿದ್ದ ಕಾರ್ಮಿಕರು ಹೊರಗಡೆ ತೆರಳಿದ್ದರು. ನಗರದಲ್ಲಿ ಬುಧವಾರ ಸಂಜೆ ವೇಳೆ ಏಕಾಏಕಿ ಭಾರೀ ಮಳೆ, ಗಾಳಿ ಉಂಟಾಗಿದ್ದು, ಸಮುದ್ರದ ಅಲೆಗಳ ಅಬ್ಬರದಿಂದ ಬೋಟ್‌ ದಡಕ್ಕೆ ಬಂದಿತ್ತು. ಬೋಟ್‌ ಲಂಗರು ಹಾಕಿದ್ದ ವೇಳೆ ಆ್ಯಂಕರ್‌ ಹಾಕಿರಲಿಲ್ಲ. ಹೀಗಾಗಿ ಗಾಳಿ ಮತ್ತು ಅಲೆಗಳ ರಭಸಕ್ಕೆ ದಡಕ್ಕೆ ಬಂದಿದೆ. ಇದನ್ನು ಎಳೆದೊಯ್ಯಲು ಮತ್ತೊಂದು ಬೋಟ್‌ ತಂದಿದ್ದು, ಅದು ಕೂಡಾ ಸಮುದ್ರದ ಮರಳಿನಲ್ಲಿ ಹುಗಿದು ಹೋಗಿತ್ತು. ಬಳಿಕ ಹರಸಾಹಸ ಪಟ್ಟು ಎಳೆಯಲು ಬಂದಿದ್ದ ಬೋಟ್‌ನ್ನು ಬಂದರಿಗೆ ತೆಗೆದುಕೊಂಡು ಹೋಗಿದ್ದು, ದಡಕ್ಕೆ ಬಂದಿದ್ದ ಬೋಟ್‌ನ್ನು ಟಕ್‌ ಬಳಸಿ ಎಳೆದುಕೊಂಡು ಹೋಗಲಾಗಿದೆ.

ಬಾಗಲಕೋಟೆ: ಜೋರಾಗಿ ಬಿದ್ದ ಮಳೆಯಿಂದಾಗಿ ಬೇವಿನಮರವು ಬುಡ ಮೇಲಾಗಿ ಕ್ಯಾಂಟರ್‌ ವಾಹನದ ಮೇಲೆ ಬಿದ್ದ ಘಟನೆ ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಚಿತ್ತವಾಡಗಿಯಲ್ಲಿ ಗುರುವಾರ ಗ್ರಾಮದ ವೀರಭದ್ರೇಶ್ವರ ದೇವಸ್ಥಾನದ ಆವರಣದಲ್ಲಿ ನಡೆದಿದೆ. ಅದೃಷ್ಟವಶಾತ್‌ ಈ ಘಟನೆಯಲ್ಲಿ ಯಾರಿಗೂ ಪ್ರಾಣಾಪಾಯವಾಗಿಲ್ಲ.

ಆದರೆ, ಕೆಲವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ವೀರಭದ್ರೇಶ್ವರ ದೇವಸ್ಥಾನದಲ್ಲಿ ಮದುವೆ ಕಾರ್ಯ ಕೂಡ ನಡೆಯುತ್ತಿತ್ತು. ಆದರೆ, ಈ ಸಂದರ್ಭದಲ್ಲಿ ಘಟನೆ ವೇಳೆ ಯಾರೂ ಹೊರಗೆ ಬಾರದ್ದರಿಂದ ಆಗಬಹುದಾಗಿದ್ದ ಅನಾಹುತ ತಪ್ಪಿತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಮಳೆ ಗಾಳಿಯ ರಭಸಕ್ಕೆ ದೇವಸ್ಥಾನದ ಆವರಣದಲ್ಲಿ ಮೂರ್ನಾಲ್ಕು ಗಿಡಗಳ ಟೊಂಗೆಗಳು ಮುರಿದು ಬಿದ್ದಿವೆ. ಇದೆ ಮಾರ್ಗಾಗಿ ಕ್ಯಾಂಟರ್‌ವೊಂದು ಹೋಗುತ್ತಿತ್ತು. ಆಗ ಗಿಡ ಬಿದ್ದಿದ್ದರಿಂದಾಗಿ ಕ್ಯಾಂಟರ್‌ ವಾಹನದ ಹಿಂಬದಿಯ ಎರಡು ಕಡೆ ಜಖಂಗೊಂಡಿದೆ. ನಂತರ ಕ್ಯಾಂಟರ್‌ ವಾಹನದ ಮೇಲೆ ಬಿದ್ದ ಗಿಡವನ್ನು ಜೆಸಿಬಿ ಮೂಲಕ ಮರವನ್ನು ತೆರವುಗೊಳಿಸಲಾಯಿತು.

4 killed in rain in more than eight districts of the state