ಚಿಕ್ಕಮಗಳೂರು: ಗೋಹತ್ಯೆ ನಿಷೇಧ ಕಾನೂನು ಕರ್ನಾಟಕ ರಾಜ್ಯದಲ್ಲಿ ಪರಿಣಾಮಕಾರಿಯಾಗಿ ಜಾರಿಗೆ ತರಲಾಗಿದ್ದು, ಈವರೆಗೆ 3 ಸಾವಿರ ಪ್ರಕರಣಗಳನ್ನು ದಾಖಲು ಮಾಡಲಾಗಿದೆ ಎಂದು ರಾಜ್ಯ ಪಶುಸಂಗೋಪನೆ ಸಚಿವ ಪ್ರಭು ಬಿ.ಚವ್ಹಾಣ್‌ ಹೇಳಿದರು. ನಗರ ಹೊರ ವಲಯದಲ್ಲಿರುವ ಮೆಡಿಕಲ್‌ ಕಾಲೇಜು ಆವರಣದಲ್ಲಿ ಭಾನುವಾರ ನಡೆದ ಕಾರ್ಯಕ್ರಮದಲ್ಲಿ ಮೈಸೂರು ವಿಭಾಗದ ಜಿಲ್ಲೆಗಳಲ್ಲಿ ಜಾನುವಾರುಗಳ ಸಂರಕ್ಷಣೆ ಮತ್ತು ಆರೋಗ್ಯ ಸೇವೆಗಾಗಿ 64 ಆ್ಯಂಬುಲೆನ್ಸ್‌ಗಳನ್ನು ಭಾನುವಾರ ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.

ಕಾಂಗ್ರೆಸ್‌ ಸರ್ಕಾರ ತನ್ನ ಅಧಿಕಾರದ ಸಂದರ್ಭದಲ್ಲಿ ಜಾರಿಗೆ ತಂದಿದ್ದ ಗೋಹತ್ಯೆ ನಿಷೇಧ ಕಾನೂನಿನಲ್ಲಿ ಧಮ್‌ ಇರಲಿಲ್ಲ, ಆಗ ಗೋ ಹಂತಕರಿಗೆ ಕೇವಲ ಒಂದು ಸಾವಿರ ರುಪಾಯಿ ದಂಡ ಹಾಗೂ 6 ತಿಂಗಳು ಮಾತ್ರ ಶಿಕ್ಷೆ ಇತ್ತು. ಇದನ್ನು 50 ಸಾವಿರದಿಂದ 5 ಲಕ್ಷದವರೆಗೆ ದಂಡ, 3 ವರ್ಷ ಶಿಕ್ಷೆ ನೀಡಲು ತಿದ್ದುಪಡಿ ತರಲಾಯಿತು ಎಂದರು. ಕಸಾಯಿಖಾನೆಗಳಿಗೆ ಅಕ್ರಮವಾಗಿ ಸಾಗಾಣಿಕೆ ಮಾಡಲಾಗುತ್ತಿದ್ದ ಸುಮಾರು 20 ಸಾವಿರಕ್ಕೂ ಹೆಚ್ಚು ಜಾನುವಾರುಗಳನ್ನು ಸಂರಕ್ಷಿಸಿ ಅವುಗಳನ್ನು ಗೋ ಶಾಲೆಗಳಿಗೆ ಕಳುಹಿಸಲಾಗಿದೆ. ಸುಮಾರು 3 ಸಾವಿರ ಕೇಸ್‌ಗಳನ್ನು ದಾಖಲು ಮಾಡಿಕೊಳ್ಳಲಾಗಿದೆ ಎಂದರು.

ಸರ್ಕಾರ ಜಾರಿಗೆ ತಂದಿರುವ ಯೋಜನೆಗಳು ಜನರಿಗೆ ತಲುಪಬೇಕು ಎಂಬ ಉದ್ದೇಶದಿಂದ ಫಲಾನುಭವಿಗಳ ಸಮಾವೇಶವನ್ನು ರಾಜ್ಯದಲ್ಲಿ ನಡೆಸಿಕೊಂಡು ಬರಲಾಗುತ್ತಿದೆ. ಕರ್ನಾಟಕ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಎಸ್ಸಿ, ಎಸ್ಟಿಗಳ ಮೀಸಲಾತಿ ಹೆಚ್ಚಳ ಮಾಡಿದೆ. ರೈತರ ಮಕ್ಕಳಿಗೆ ವಿದ್ಯಾನಿಧಿ ಯೋಜನೆಯನ್ನು ಜಾರಿಗೆ ತರಲಾಗಿದೆ ಎಂದು ಹೇಳಿದರು. ಪಶು ಸಂಜೀವಿನಿ 1962 ಗೋ ಮಾತೆಯ ಅನಾರೋಗ್ಯದ ಸಂದರ್ಭದಲ್ಲಿ 1962 ದೂರವಾಣಿ ಸಂಖ್ಯೆಗೆ ಕರೆ ಮಾಡಿದರೆ ಪಶು ಸಂಜೀವಿನಿ ವಾಹನ ವೈದ್ಯರ ಸಹಿತ ರೈತರ ಮನೆ ಬಾಗಿಲಿಗೆ ಹೋಗಿ ಚಿಕಿತ್ಸೆ ನೀಡಲಿದೆ ಎಂದ ಅವರು, ರಾಜ್ಯದ ಪ್ರತಿ ತಾಲೂಕು ಕೇಂದ್ರಕ್ಕೆ ಒಂದರಂತೆ 291 ಆ್ಯಂಬುಲೆನ್ಸ್‌ ನೀಡಲಾಗುವುದು.

ಈ ಪೈಕಿ 275 ಪಶು ಸಂಚಾರಿ ಚಿಕಿತ್ಸಾ ವಾಹನಗಳು ನೀಡಲಾಗಿದೆ. ಇದು, ಕೇಂದ್ರ ಸರ್ಕಾರದ ಜನಪರ ಯೋಜನೆಯಾಗಿದೆ ಎಂದರು. ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ, ಪ್ರಾಣಿ ಕಲ್ಯಾಣ ಮಂಡಳಿ ಸ್ಥಾಪನೆ ಜತೆಗೆ ಪ್ರಾಣಿ ಸಹಾಯವಾಣಿ ಕೇಂದ್ರವನ್ನು ತೆರೆಯಲಾಗಿದ್ದು, ಈ ಕೇಂದ್ರಗಳಿಗೆ ರಾಜ್ಯದಲ್ಲಿ ಈವರೆಗೆ ಸುಮಾರು ಒಂದು ಲಕ್ಷ ಕರೆಗಳು ಬಂದಿವೆ ಎಂದು ಹೇಳಿದರು. ರಾಜ್ಯದಲ್ಲಿ ಮತ್ತೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಬೇಕು, ಈಗ ಜಾರಿಗೆ ತಂದಿರುವ ಯೋಜನೆಗಳ ಜತೆಗೆ ಮತ್ತಷ್ಟುಕಾರ್ಯಕ್ರಮಗಳನ್ನು ಅನುಷ್ಠಾನಕ್ಕೆ ತರಲಾಗುವುದು ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್‌, ವಿಧಾನಪರಿಷತ್‌ ಉಪ ಸಭಾಪತಿ ಎಂ.ಕೆ. ಪ್ರಾಣೇಶ್‌, ಶಾಸಕರಾದ ಸಿ.ಟಿ. ರವಿ, ಎಂ.ಪಿ. ಕುಮಾರಸ್ವಾಮಿ, ನಗರಸಭಾಧ್ಯಕ್ಷ ವರಸಿದ್ಧಿ ವೇಣುಗೋಪಾಲ್‌, ಚಿಕ್ಕಮಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸಿ. ಆನಂದ್‌, ಜಿಲ್ಲಾಧಿಕಾರಿ ಕೆ.ಎನ್‌. ರಮೇಶ್‌, ಜಿಲ್ಲಾ ರಕ್ಷಣಾಧಿಕಾರಿ ಉಮಾ ಪ್ರಶಾಂತ್‌, ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು, ಅಪರ ಜಿಲ್ಲಾಧಿಕಾರಿ ಬಿ.ಆರ್‌. ರೂಪಾ, ತೇಗೂರು ಗ್ರಾಮ ಪಂಚಾಯ್ತಿ ಅಧ್ಯಕ್ಷ ಕೆ. ನಾರಾಯಣ ಉಪಸ್ಥಿತರಿದ್ದರು.

Cow slaughter ban 3 thousand cases registered