ದೊಡ್ಡಬಳ್ಳಾಪುರ: ಅಂತಾರಾಷ್ಟ್ರೀಯ ಖ್ಯಾತಿಯ ಕ್ರಿಕೆಟಿಗ ಕರ್ನಾಟಕದ ಕೆ.ಎಲ್. ರಾಹುಲ್‌ ತಾಲೂಕಿನ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯಕ್ಕೆ ಭೇಟಿ ನೀಡಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು.

ಗೆಳೆಯರೊಡನೆ ದೇವಾಲಯಕ್ಕೆ ಬಂದ ರಾಹುಲ್‌ ಅವರನ್ನು, ದೇವಾಲಯದ ಕಾರ್ಯ ನಿರ್ವಾಹಕ ಅಧಿಕಾರಿ ಡಿ.ನಾಗರಾಜ್, ಅಧಿಕ್ಷಕ ರಘು ಹುಚ್ಚಪ್ಪ, ಎಸ್‌ಡಿಸಿ ನಾಗರಾಜ್‌ ಭೇಟಿಯಾಗಿ ದೇವರ ದರ್ಶನಕ್ಕೆ ವ್ಯವಸ್ಥೆ ಮಾಡಿದರು.

ಕಳೆದ ಐದು ವರ್ಷಗಳ ಹಿಂದೆ ಘಾಟಿ ಸುಬ್ರಹ್ಮಣ್ಯ ದೇವಾಲಯಕ್ಕೆ ಬಂದು ಪೂಜೆ ಸಲ್ಲಿಸಿದ್ದ ರಾಹುಲ್‌, ಭಾನುವಾರ ಸಂಜೆ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.

ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯ ಬಳಿಕ ಗಾಯದ ಸಮಸ್ಯೆ ಹಾಗೂ ಕೋವಿಡ್‌ನಿಂದ ಸ್ಪರ್ಧಾತ್ಮಕ ಕ್ರಿಕೆಟ್‌ನಿಂದ ದೂರ ಉಳಿದಿರುವ ಆರಂಭಿಕ ಬ್ಯಾಟ್ಸ್‌ಮನ್‌ ಕೆ.ಎಲ್‌ ರಾಹುಲ್‌ ಸದ್ಯ ತಂಡಕ್ಕೆ ಮರಳಲು ಎದುರು ನೋಡುತ್ತಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧ ತವರು ಟಿ20 ಸರಣಿಯಲ್ಲಿ ಭಾರತ ತಂಡವನ್ನು ರಾಹುಲ್‌ ಮುನ್ನಡೆಸಬೇಕಿತ್ತು. ಆದರೆ, ಗಂಭೀರ ಗಾಯಕ್ಕೆ ತುತ್ತಾಗಿದ್ದರಿಂದ ಅವರು ತಂಡದಿಂದ ಹೊರ ನಡೆದು ಹಾಗೂ ಚಿಕಿತ್ಸೆಗೆಂದು ಜಪಾನ್‌ಗೆ ತೆರಳಿದ್ದರು.