ಬೆಂಗಳೂರು : :ವಿಧಾನಸಭೆ ಚುನಾವಣೆಯಲ್ಲಿ ಬಹುಮತ ಪಡೆದು ಸ್ವಂತ ಬಲದ ಮೇಲೆ ಸರ್ಕಾರ ರಚಿಸುವ ವಿಶ್ವಾಸದಲ್ಲಿರುವ ಬಿಜೆಪಿ, ಕಾಂಗ್ರೆಸ್ಸಿಗೆ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ(HD Kumaraswamy) ಹೊಸ ‘ಬಾಂಬ್‌’ ಹಾಕಿದ್ದಾರೆ.

ಎರಡೂ ಪಕ್ಷಗಳ ರಾಷ್ಟ್ರೀಯ ನಾಯಕರು ತಮ್ಮೊಂದಿಗೆ ಸಂಪರ್ಕದಲ್ಲಿದ್ದಾರೆ ಎಂದು ಅವರು ನೀಡಿರುವ ಹೇಳಿಕೆಯು ರಾಜಕೀಯದಲ್ಲಿ ಸಂಚಲನವನ್ನು ಸೃಷ್ಟಿಸಿದೆ. ಆಂಗ್ಲ ಟೀವಿ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಅವರು ಈ ವಿಷಯವನ್ನು ಹೇಳಿದ್ದಾರೆ. ಈ ಮೂಲಕ ಚುನಾವಣೆ ಹೊಸ್ತಿಲಿನಲ್ಲಿಯೇ ಮೈತ್ರಿ ವೇದಿಕೆ ಸಿದ್ಧವಾಗುತ್ತಿದೆಯೇ ಎಂಬ ಕುತೂಹಲ ಮೂಡಿಸಿದೆ.

ಎರಡೂ ರಾಷ್ಟ್ರೀಯ ಪಕ್ಷಗಳಿಗೆ ರಾಜ್ಯದಲ್ಲಿ ಬಹುಮತ ಪಡೆದು ಸರ್ಕಾರ ರಚನೆ ಮಾಡುವುದು ಕಷ್ಟಕರ ಎಂಬ ವಾಸ್ತವಾಂಶ ಗೊತ್ತಿದೆ. ಹೀಗಾಗಿ ಬಿಜೆಪಿ-ಕಾಂಗ್ರೆಸ್‌ನ ದೊಡ್ಡಮಟ್ಟದ ನಾಯಕರು ತಮ್ಮ ಸಂಪರ್ಕದಲ್ಲಿದ್ದು, ಆಹ್ವಾನ ನೀಡುತ್ತಿದ್ದಾರೆ. ಆದರೆ, ಯಾವುದೇ ಭರವಸೆಯನ್ನು ನಾನು ನೀಡಿಲ್ಲ. ನಮ್ಮ ಪಕ್ಷವು ಸ್ವಂತ ಬಲದ ಮೇಲೆ ಸರ್ಕಾರ ರಚನೆ ಮಾಡಲಿದೆ ಎಂಬ ವಿಶ್ವಾಸ ಇದೆ ಎಂದು ಹೇಳಿದರು.

ಕಳೆದ ಮೂರು ಚುನಾವಣೆಯಲ್ಲಿ ಪಕ್ಷದ ಸೋಲಿನ ಬಗ್ಗೆ ಪರಾಮರ್ಶೆ ಮಾಡಲಾಗಿದೆ. ಪಕ್ಷ ಸಂಘಟನೆ ಮಾಡುವಲ್ಲಿನ ಕಾರ್ಯವೈಖರಿ ಕುರಿತು ಪರಿಶೀಲನಾ ಸಭೆಗಳನ್ನು ನಡೆಸಿ ಸಾಕಷ್ಟುಬದಲಾವಣೆಗಳನ್ನು ಮಾಡಿಕೊಳ್ಳಲಾಗಿದೆ. ವಿಭಿನ್ನವಾಗಿ ಪಕ್ಷವನ್ನು ಕಟ್ಟುವ ಕೆಲಸ ಮಾಡುತ್ತಿದ್ದೇನೆ. ಸ್ವತಂತ್ರವಾಗಿ ಸರ್ಕಾರ ರಚನೆ ಮಾಡುವ ಸಂಬಂಧ ಅಗತ್ಯ ಇರುವ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಪ್ರಚಾರದಿಂದ ಹಿಡಿದು ಪ್ರತಿಯೊಂದು ವಿಚಾರದಲ್ಲಿಯೂ ಎಚ್ಚರಿಕೆಯ ನಡೆಯನ್ನು ಇಡಲಾಗುತ್ತಿದೆ. ರಾಜ್ಯದ ಜನತೆ ಸಹ ಪ್ರಾದೇಶಿಕ ಪಕ್ಷದತ್ತ ಒಲವು ತೋರಿದ್ದಾರೆ. ನಮಗೆ ಜನರು ಆಶೀರ್ವಾದ ಮಾಡುವ ವಿಶ್ವಾಸ ಇದ್ದು, ಸರ್ಕಾರ ರಚನೆ ಮಾಡುತ್ತೇವೆ ಎಂದು ತಿಳಿಸಿದರು.

ಪ್ರತಿದಿನ 18 ಗಂಟೆಗಳ ಕಾಲ ಕೆಲಸ ಮಾಡಿ ಪಕ್ಷವನ್ನು ಸಂಘಟಿಸುವ ಕೆಲಸ ಮಾಡಲಾಗುತ್ತಿದೆ. ಬಿಜೆಪಿಯ ವಿಜಯಸಂಕಲ್ಪ ಯಾತ್ರೆ, ಕಾಂಗ್ರೆಸ್‌ನ ಪ್ರಜಾಧ್ವನಿಗಿಂತ ಜೆಡಿಎಸ್‌ನ ಪಂಚರತ್ನ ರಥಯಾತ್ರೆ ವಿಭಿನ್ನ ಮತ್ತು ವಿಶಿಷ್ಟತೆಯಿಂದ ಕೂಡಿದೆ. ಪ್ರತಿ ಹಳ್ಳಿಗಳಿಗೆ ತೆರಳಿ ಜನರೊಂದಿಗೆ ಬೆರೆತು ಅಧಿಕಾರಕ್ಕೆ ಬಂದರೆ ಏನು ಮಾಡಲಾಗುವುದು ಎಂಬ ಮುನ್ನೋಟವನ್ನು ಮುಂದಿಡಲಾಗುತ್ತಿದೆ. ಕಾಂಗ್ರೆಸ್‌, ಬಿಜೆಪಿ ಕೇವಲ ನಗರಪ್ರದೇಶಗಳಿಗೆ ಸೀಮಿತವಾಗಿ ಕೆಲಸ ಮಾಡುತ್ತಿವೆ. ಜನರ ಸಮಸ್ಯೆಗಳನ್ನು ಆಲಿಸಿ ಪರಿಹಾರ ಒದಗಿಸುವ ಆಶ್ವಾಸನೆಯನ್ನು ನಾವು ನೀಡುತ್ತಿದ್ದೇವೆ ಎಂದರು.

Leaders of both BJP and Congress parties are in touch