ಚಿಕ್ಕಮಗಳೂರು: ಜನರ ಅಪೇಕ್ಷೆ ಮತ್ತು ನಿರೀಕ್ಷೆಗೆ ತಕ್ಕಂತೆ ಕರ್ತವ್ಯ ನಿರ್ವಹಿಸಲು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಮುಂದಾಗಬೇಕೆಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ||.ಬಿ ಗೋಪಾಲಕೃಷ್ಣ ಕರೆ ನೀಡಿದರು.

ಅವರು ಇಂದು ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಘಟಕ ಇವರುಗಳ ಸಂಯುಕ್ತಾಶ್ರಯದಲ್ಲಿ ಜಿ.ಪಂ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಮಾನಸಿಕ ಆರೋಗ್ಯ ಮತ್ತು ಒತ್ತಡ ನಿರ್ವಹಣೆ ಕಾರ್ಯಾಗಾರ ಹಾಗೂ ಆರೋಗ್ಯ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.

ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅಭಿವೃದ್ಧಿ ಅಧಿಕಾರಿಗಳು ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಬೇಕು. ಈ ನಿಟ್ಟಿನಲ್ಲಿ ಇಂದು ಅವರಿಗೆ ಒತ್ತಡ ನಿರ್ವಹಣೆ ಕಾರ್ಯಾಗಾರ ಆರೋಗ್ಯ ತಪಾಸಣಾ ಶಿಬಿರ ಏರ್ಪಡಿಸಿರುವುದು ಶ್ಲಾಘನೀಯ ಎಂದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ಅಶ್ವತ್‌ಬಾಬು ಮಾತನಾಡಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಸಂಬಂಧಿಸಿದ ವಿವಿಧ ರೀತಿಯ ಆರೋಗ್ಯ ತಪಾಸಣೆ ಕೈಗೊಳ್ಳಲಾಗಿದ್ದು, ಈ ಸಂದರ್ಭದಲ್ಲಿ ಪರೀಕ್ಷಿಸಿದ ವೈದ್ಯರು ಅನಾರೋಗ್ಯದ ಬಗ್ಗೆ ಮಾಹಿತಿ ನೀಡಿದರೆ ತುರ್ತು ಚಿಕಿತ್ಸೆ ನೀಡಲು ಬದ್ದವಾಗಿರುವುದಾಗಿ ಮಾಹಿತಿ ನೀಡಿದರು.

ನಾಳೆ (ಡಿ.೧೨) ಕಡೂರು ತಾಲ್ಲೂಕಿನಲ್ಲಿ ಈ ಶಿಬಿರವನ್ನು ನಡೆಸಲು ತೀರ್ಮಾನಿಸಲಾಗಿದ್ದು, ನಂತರ ಜಿಲ್ಲೆಯ ಬೇರೆ ಬೇರೆ ತಾಲೂಕುಗಳಲ್ಲಿಯೂ ಈ ಶಿಬಿರವನ್ನು ನಡೆಸುವ ಮೂಲಕ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ಇಲಾಖೆ ಕ್ರಮ ವಹಿಸುತ್ತಿದೆ ಎಂದರು.

ಈ ಸಂದರ್ಭದಲ್ಲಿ ಮಾನಸಿಕ ಆರೋಗ್ಯ ಕಾರ್ಯಕ್ರಮಾಧಿಕಾರಿ ಡಾ|| ಬಾಲಕೃಷ್ಣ, ಜಿಲ್ಲಾಸ್ಪತ್ರೆಯ ಮಾನಸಿಕ ರೋಗ ತಜ್ಞರಾದ ಡಾ|| ಪವಿತ್ರ, ಡಿ.ಎಂ ಹೆಚ್.ಪಿ ಮಾನಸಿಕ ರೋಗ್ಯ ತಜ್ಞರಾದ ಡಾ|| ವಿನಯ್‌ಕುಮಾರ್, ಚಿಕಿತ್ಸಾ ಮನಃಶಾಸ್ತ್ರಜ್ಞ ಸತೀಶ್ ಹೆಚ್.ಪಿ, ಜಯಣ್ಣು ಎಸ್.ಎಚ್, ಮೇಲ್ವಿಚಾರಕ ಪ್ರಭುಕುಮಾರ್ ಮತ್ತು ಆರೋಗ್ಯ ಇಲಾಖೆ ತಂಡ ಹಾಗೂ ಚಿಕ್ಕಮಗಳೂರು ತಾಲೂಕಿನ ಎಲ್ಲಾ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಭಾಗವಹಿಸಿದರು.

Mental Health and Stress Management Workshop for Panchayat Development Officers