ಮೈಸೂರು: ಕಾಂಗ್ರೆಸ್ ಹೈಕಮಾಂಡ್ ಜೊತೆ ಮಾತನಾಡಿದ್ದೇನೆ ಎಂಬ ಎಚ್.ಡಿ.ಕುಮಾರಸ್ವಾಮಿ ಹೇಳಿಕೆ ಸತ್ಯಕ್ಕೆ ದೂರವಾದದ್ದು. ನಮ್ಮ ಹೈಕಮಾಂಡ್ ಜೊತೆ ಯಾರೂ ಮಾತನಾಡಿಲ್ಲ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah) ಸ್ಪಷ್ಟಪಡಿಸಿದ್ದಾರೆ.
ಎಚ್.ಡಿ.ಕೋಟೆ(HD Kote)ಯಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಕಾಂಗ್ರೆಸ್ ಹೈಕಮಾಂಡ್ ಜೊತೆ ಮಾತನಾಡಿದ್ದೇನೆ ಎಂಬ ಕುಮಾರಸ್ವಾಮಿ(Kumaraswamy) ಹೇಳಿಕೆಗೆ ತಿರುಗೇಟು ನೀಡಿದ ಅವರು, ನಮ್ಮ ಹೈಕಮಾಂಡ್ ಜೊತೆ ಯಾರೂ ಮಾತನಾಡಿಲ್ಲ. ಈ ಬಾರಿ ನಾವು ಯಾರ ಜೊತೆಯೂ ಮಾತುಕತೆ ಮಾಡಲ್ಲ. ಯಾವ ಪಕ್ಷದ ಜೊತೆಯೂ ಮೈತ್ರಿ ಮಾಡಿಕೊಳ್ಳುವುದಿಲ್ಲ. ಕಾಂಗ್ರೆಸ್ ಏಕಾಂಗಿಯಾಗಿ ಸ್ಪರ್ಧಿಸಿ, ಅಧಿಕಾರಕ್ಕೆ ಬರುತ್ತದೆ ಎಂದು ತಿರುಗೇಟು ನೀಡಿದರು. ಕಳೆದ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ನಡುವೆ ಮ್ಯಾಚ್ ಫಿಕ್ಸಿಂಗ್ ನಡೆದಿತ್ತು. ಹೀಗಾಗಿ, ಮುಂದಿನ ಚುನಾವಣೆಯಲ್ಲಿ ಮತ್ತೆ ಮೈತ್ರಿ ಮಾಡಿಕೊಂಡರೂ ಆಶ್ಚರ್ಯ ಇಲ್ಲ ಎಂದು ಆರೋಪಿಸಿದರು.
ಸಿದ್ದರಾಮಯ್ಯ ಜೊತೆ ಫೋಟೊ ತೆಗೆಸಿಕೊಂಡ ವ್ಯಕ್ತಿ ಶಿಕಾರಿಪುರದ ಕಲ್ಲು ತೂರಾಟದಲ್ಲಿ ಭಾಗಿಯಾಗಿದ್ದಾನೆ ಎಂಬ ಸಿಎಂ ಹೇಳಿಕೆಗೆ ಪ್ರತಿಕ್ರಿಯಿಸಿ, ಶಿಕಾರಿಪುರದಲ್ಲಿ ಯಡಿಯೂರಪ್ಪನವರ ಮನೆ ಮೇಲೆ ಕಲ್ಲು ತೂರಿರುವುದು ಕಾಂಗ್ರೆಸ್ನವರು ಅಲ್ಲ ಎಂದು ಸ್ವತ: ಯಡಿಯೂರಪ್ಪನವರೇ ಹೇಳಿದ್ದಾರೆ. ಯಡಿಯೂರಪ್ಪಗಿಂತ ಬೊಮ್ಮಾಯಿ(CM Basavaraj bommai)ಗೆ ಹೆಚ್ಚು ಗೊತ್ತಾ?. ಬೊಮ್ಮಾಯಿ ಅವರಿಗಿಂತ ಹೆಚ್ಚಿನ ಮಾಹಿತಿ ಯಡಿಯೂರಪ್ಪನವರಿಗೆ ಹೋಗಿರುತ್ತದೆ. ಯಾರೋ ಬರುತ್ತಾರೆ, ನಮ್ಮ ಜೊತೆ ಫೋಟೋ ತೆಗೆಸಿಕೊಳ್ಳುತ್ತಾರೆ. ಅವರು ಒಳ್ಳೆಯವರೋ, ಕೆಟ್ಟವರೋ ಯಾರಿಗೆ ಗೊತ್ತಿರುತ್ತದೆ. ರಾಜಕೀಯಕ್ಕಾಗಿ ಏನೇನೋ ಹೇಳಬಾರದು ಎಂದು ಸಿಎಂ ವಿರುದ್ಧ ಕಿಡಿಕಾರಿದರು.
ಮೀಸಲಾತಿಗೆ ಕಾಂಗ್ರೆಸ್ ವಿರೋಧ ಇರಲಿಲ್ಲ. ಆದರೆ, ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹೋಗಬೇಕಿತ್ತು. ಮೂರೂವರೆ ವರ್ಷ ಬಿಜೆಪಿ ಏನು ಮಾಡುತ್ತಿತ್ತು? ಒಳ ಮೀಸಲಾತಿಗೆ ಕಾಂಗ್ರೆಸ್ ಒಲವು ತೋರಿಸಿತ್ತು ಎಂದರು.
No one has spoken to the Congress High Command