ಚಿಕ್ಕಮಗಳೂರು: ರಾಜ್ಯದಲ್ಲಿ ಇನ್ನು ಕೆಲವೇ ದಿನಗಳಲ್ಲಿ ವಿಧಾನಸಭಾ ಚುನಾವಣೆಗೆ ಅಧಿಸೂಚನೆ ಹೊರಬೀಳಲಿದೆ. ಈ ಹಿನ್ನಲೆಯಲ್ಲಿ ಚುನಾವಣಾ ಆಯೋಗದ ಕಟ್ಟುನಿಟ್ಟಿನ ಆದೇಶಗಳನ್ನು ಪಾಲನೆ ಮಾಡಲು ಚಿಕ್ಕಮಗಳೂರು ಜಿಲ್ಲಾಡಳಿತ ಸಜ್ಜಾಗಿದ್ದು ಸಭೆಗಳ ಮೇಲೆ ಸಭೆಗಳನ್ನು ನಡೆಸುತ್ತಿದೆ. ಇದರ ಭಾಗವಾಗಿ ಜಿಲ್ಲೆಯಲ್ಲಿ ಅನುಮತಿ ಪಡೆಯದೆ ಇರುವ ರಾಜಕೀಯ ಪಕ್ಷಗಳು ವಾಲ್ಪೇಂಟಿಂಗ್, ಮತ್ತು ಪೋಸ್ಟರ್ ಇತ್ಯಾದಿಗಳನ್ನು ತೆರವುಗೊಳಿಸುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ಸಭೆ ನಡೆಸಿದರು.

ಅನುಮತಿ ಪಡೆಯದೇ ಪೋಸ್ಟರ್ ಅಂಟಿಸುವುದು ನಿಷೇಧ: ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆ 2023ಕ್ಕೆ ಸಂಬಂಧಿಸಿದಂತೆ ಅನುಮತಿ ಪಡೆಯದೇ ಅನಧಿಕೃತವಾಗಿ ಆಳವಡಿಸಲಾದ ಬ್ಯಾನರ್ಸ್, ಪ್ಲೆಕ್ಸ್, ಬಂಟಿಂಗ್ಸ್, ಹೋರ್ಡಿಂಗ್ಸ್, ವಾಲ್ಪೇಂಟಿಂಗ್, ಮತ್ತು ಪೋಸ್ಟರ್ ಇತ್ಯಾದಿಗಳನ್ನು ತೆರವುಗೊಳಿಸುವ ಕುರಿತು ಸಂಬಂಧಿಸಿದ ಅಧಿಕಾರಿಗಳಿಗೆ ವಿಡಿಯೋ ಸಂವಾದ ಮೂಲಕ ಜಿಲ್ಲಾಧಿಕಾರಿ ಕೆ.ಎನ್. ರಮೇಶ್ ಸೂಚಿಸಿದ್ದಾರೆ. ನಗರದ ವಾರ್ತಾ ಇಲಾಖೆಯ ಕೆಸ್ವಾನ್ನಲ್ಲಿ 2023ರ ವಿಧಾನಸಭಾ ಚುನಾವಣೆ ಕರ್ತವ್ಯಕ್ಕೆ ನೇಮಕಗೊಂಡಿರುವ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಈ ಕುರಿತು ಅಧಿಕಾರಿಗಳಿಗೆ ಮಾಹಿತಿ ನೀಡಿದ ಅವರು ಅನುಮತಿ ಪಡೆಯದೇ ಅನಧಿಕೃತವಾಗಿ ಬ್ಯಾನರ್ಸ್, ಪ್ಲೆಕ್ಸ್, ಬಂಟಿಂಗ್ಸ್, ಹೋರ್ಡಿಂಗ್ಸ್, ವಾಲ್ಪೇಂಟಿಂಗ್, ಮತ್ತು ಪೋಸ್ಟರ್ ಇತ್ಯಾದಿಗಳನ್ನು ಸಾರ್ವಜನಿಕ ಸ್ಥಳಗಳಲ್ಲಿ ಆಳವಡಿಸುವುದನ್ನು ಹಾಗೂ ಧಾರ್ಮಿಕ ಸ್ಥಳಗಳನ್ನು ರಾಜಕೀಯ ಉದ್ದೇಶಗಳಿಗಾಗಿ ಉಪಯೋಗಿಸುವುದನ್ನು ಕೋಮು ಸೌಹಾರ್ದತೆಯನ್ನು ಕದಡುವಂತಹ ಹೇಳಿಕೆಗಳನ್ನು ನೀಡುವುದು ಮುಂತಾದ ಕೃತ್ಯಗಳನ್ನು ಚುನಾವಣಾ ಆಯೋಗ ನಿಷೇಧಿಸಿಲಾಗಿದೆ. ಆದ್ದರಿಂದ ಇಂತಹ ಕೃತ್ಯಗಳಲ್ಲಿ ತೊಡಗದಂತೆ ಸಾರ್ವಜನಿಕರಿಗೆ ಈ ಮೂಲಕ ಸೂಚನೆಯನ್ನು ನೀಡಲಾಗುತ್ತಿದೆ. ಆದಾಗ್ಯೂ ಸಹ ಇಂತಹ ಕೃತ್ಯಗಳಲ್ಲಿ ತೊಡಗುವ ವ್ಯಕ್ತಿ, ಸಂಘಟನೆಗಳ ಮೇಲೆ ಕಾನೂನು ಪ್ರಕಾರ ನಿರ್ದಾಕ್ಷಿಣ್ಯವಾಗಿ ಕ್ರಮ ಜರುಗಿಸಬೇಕು ಎಂದು ತಿಳಿಸಿದರು.

ಪ್ರತಿ ದಿನ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚನೆ: ಪಂಚಾಯಿತಿ ವ್ಯಾಪ್ತಿಯಲ್ಲಿ ತಾಲ್ಲೂಕು ಕಾರ್ಯ ನಿರ್ವಾಹಕಾಧಿಕಾರಿಗಳು, ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಕ್ರಮ ವಹಿಸಬೇಕಲ್ಲದೆ, ರಾಜಕೀಯ ಪಕ್ಷಗಳ ಸಭೆ, ಸಮಾರಂಭದ ನಂತರ 2 ಗಂಟೆ ಒಳಗೆ ಬ್ಯಾನರ್ಸ್, ಪ್ಲೆಕ್ಸ್ ಇತ್ಯಾದಿಗಳನ್ನು ತೆರವುಗೊಳಿಸಬೇಕು, ತೆರವುಗೊಳಿಸದಿದ್ದರೆ, ಚುನಾವಣಾ ಆಯೋಗದ ನಿರ್ದೇಶನದಂತೆ ಕ್ರಮ ಜರುಗಿಸಬೇಕೆಂದ ಅವರು ಪ್ರತಿ ದಿನ ವರದಿ ನೀಡಬೇಕೆಂದು ಸೂಚಿಸಿದರು.ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್, ಅಪರ ಜಿಲ್ಲಾಧಿಕಾರಿ ಬಿ.ಆರ್. ರೂಪ, ಉಪವಿಭಾಗಾಧಿಕಾರಿ ರಾಜೇಶ್, ತಹಸೀಲ್ದಾರ್ ವಿನಾಯಕ ಪ್ರಸಾದ್ ಹಾಗೂ ಚುನಾವಣಾ ಕರ್ತವ್ಯಕ್ಕೆ ನೇಮಕವಾಗಿರುವ ಅಧಿಕಾರಿಗಳು ಹಾಜರಿದ್ದರು.

Posting of banners flexes posters without permission is prohibited